ಸಂದೇಶವಾಹಕರಲ್ಲಿ ವಿಶ್ವಾಸವಿಡುವುದು

ಸಂದೇಶವಾಹಕರಲ್ಲಿ ವಿಶ್ವಾಸವಿಡುವುದು

3- "ನನ್ನ ಸಮುದಾಯದಲ್ಲಿರುವ ಎಲ್ಲರೂ ಸ್ವರ್ಗಕ್ಕೆ ಹೋಗುತ್ತಾರೆ; ನಿರಾಕರಿಸಿದವನ ಹೊರತು*." ಅನುಯಾಯಿಗಳು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! (ಸ್ವರ್ಗಕ್ಕೆ ಹೋಗಲು) ನಿರಾಕರಿಸುವವನು ಯಾರು?" ಅವರು ಉತ್ತರಿಸಿದರು: "ಯಾರು ನನ್ನ ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ಸ್ವರ್ಗಕ್ಕೆ ಹೋಗುತ್ತಾನೆ; ಮತ್ತು ಯಾರು ನನ್ನ ಆಜ್ಞೆಗಳನ್ನು ಪಾಲಿಸುವುದಿಲ್ಲವೋ ಅವನು (ಸ್ವರ್ಗಕ್ಕೆ ಹೋಗಲು) ನಿರಾಕರಿಸಿದನು."

7- "ನನಗಿಂತ ಮೊದಲು ಯಾರಿಗೂ ನೀಡಲಾಗಿರದ ಐದು ವಿಷಯಗಳನ್ನು ನನಗೆ ನೀಡಲಾಗಿದೆ.* ಒಂದು ತಿಂಗಳ ಪ್ರಯಾಣದಷ್ಟು ದೂರದ ತನಕ ನನಗೆ ಭಯದ ಮೂಲಕ ಸಹಾಯ ಮಾಡಲಾಗಿದೆ. ನನಗೆ ಭೂಮಿಯನ್ನು ಮಸೀದಿ ಮತ್ತು ಶುದ್ಧೀಕರಣದ ವಸ್ತುವಾಗಿ ಮಾಡಿಕೊಡಲಾಗಿದೆ. ನನ್ನ ಸಮುದಾಯದ ವ್ಯಕ್ತಿಗೆ ಯಾವುದೇ ಸ್ಥಳದಲ್ಲಿ ನಮಾಝಿನ ಸಮಯವಾದರೂ ಆತ ನಮಾಝ್ ಮಾಡಬಹುದು. ನನಗೆ ಯುದ್ಧಾರ್ಜಿತ ಸೊತ್ತನ್ನು ಅನುಮತಿಸಲಾಗಿದೆ. ನನಗಿಂತ ಮೊದಲಿನ ಯಾವುದೇ ಪ್ರವಾದಿಗೂ ಇದನ್ನು ಅನುಮತಿಸಲಾಗಿರಲಿಲ್ಲ. ನನಗೆ ಶಿಫಾರಸ್ಸು ಮಾಡುವ ಅಧಿಕಾರವನ್ನು ನೀಡಲಾಗಿದೆ. ಇತರ ಪ್ರವಾದಿಗಳನ್ನು ವಿಶೇಷವಾಗಿ ಅವರ ಜನತೆಗೆ ಮಾತ್ರ ಕಳುಹಿಸಲಾಗುತ್ತಿತ್ತು. ಆದರೆ ನನ್ನನ್ನು ಸಂಪೂರ್ಣ ಮನುಕುಲಕ್ಕೆ ಕಳುಹಿಸಲಾಗಿದೆ."

10- ಒಮ್ಮೆ ನಾವು ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಸೀದಿಯಲ್ಲಿ ಕುಳಿತಿರುವಾಗ, ಒಬ್ಬ ವ್ಯಕ್ತಿ ಒಂಟೆಯಲ್ಲಿ ಸವಾರಿ ಮಾಡುತ್ತಾ ಅಲ್ಲಿಗೆ ಬಂದರು. ಅವರು ಒಂಟೆಯನ್ನು ಮಸೀದಿಯೊಳಗೆ ಮಂಡಿಯೂರಿಸಿ ಕಟ್ಟಿಹಾಕಿದರು. ನಂತರ ನಮ್ಮೊಡನೆ ಕೇಳಿದರು: "ನಿಮ್ಮಲ್ಲಿ ಮುಹಮ್ಮದ್ ಯಾರು?" ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮ ನಡುವೆ ಒರಗಿ ಕುಳಿತಿದ್ದರು. ನಾವು ಹೇಳಿದೆವು: "ಒರಗಿ ಕುಳಿತಿರುವ ಈ ಬೆಳ್ಳಗಿನ ವ್ಯಕ್ತಿ." ಆಗ ಆ ವ್ಯಕ್ತಿ, "ಓ ಅಬ್ದುಲ್ ಮುತ್ತಲಿಬರ ಮಗನೇ!" ಎಂದು ಕರೆದರು. ಪ್ರವಾದಿಯವರು, "ನಾನು ನಿನಗೆ ಉತ್ತರ ನೀಡಲು ಇಲ್ಲಿದ್ದೇನೆ" ಎಂದು ಉತ್ತರಿಸಿದರು. ಆಗ ಆ ವ್ಯಕ್ತಿ ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಾನು ತಮ್ಮಲ್ಲಿ ಕೆಲವು ಕಠಿಣ ಪ್ರಶ್ನೆಗಳನ್ನು ಕೇಳುತ್ತೇನೆ. ತಾವು ನನ್ನ ಮೇಲೆ ಕೋಪ ಮಾಡಿಕೊಳ್ಳಬಾರದು." ಆಗ ಪ್ರವಾದಿಯವರು ಹೇಳಿದರು: "ನಿಮಗೆ ಕೇಳಲಿರುವುದನ್ನು ಕೇಳಿ." ಆ ವ್ಯಕ್ತಿ ಕೇಳಿದರು: "ತಮ್ಮ ಮತ್ತು ತಮ್ಮ ಪೂರ್ವಜರ ಪರಿಪಾಲಕನನ್ನು (ಅಲ್ಲಾಹನನ್ನು) ಮುಂದಿಟ್ಟು ಕೇಳುತ್ತೇನೆ. ತಮ್ಮನ್ನು ಸಂಪೂರ್ಣ ಮನುಕುಲದ ಕಡೆಗೆ ಕಳುಹಿಸಿದ್ದು ಅಲ್ಲಾಹನೋ?" ಅವರು ಉತ್ತರಿಸಿದರು: "ಅಲ್ಲಾಹನಾಣೆ! ಹೌದು." ಅವರು ಕೇಳಿದರು: "ಅಲ್ಲಾಹನನ್ನು ಮುಂದಿಟ್ಟು ಕೇಳುತ್ತೇನೆ. ದಿನರಾತ್ರಿಯಲ್ಲಿ ನಾವು ಐದು ವೇಳೆಯ ನಮಾಝ್‌ಗಳನ್ನು ನಿರ್ವಹಿಸಬೇಕೆಂದು ತಮಗೆ ಆದೇಶಿಸಿದ್ದು ಅಲ್ಲಾಹನೋ?" ಅವರು ಉತ್ತರಿಸಿದರು: "ಅಲ್ಲಾಹನಾಣೆ! ಹೌದು." ಅವರು ಕೇಳಿದರು: "ಅಲ್ಲಾಹನನ್ನು ಮುಂದಿಟ್ಟು ಕೇಳುತ್ತೇನೆ. ವರ್ಷದಲ್ಲಿ ಈ ತಿಂಗಳು ನಾವು ಉಪವಾಸ ಆಚರಿಸಬೇಕೆಂದು ತಮಗೆ ಆದೇಶಿಸಿದ್ದು ಅಲ್ಲಾಹನೋ?" ಅವರು ಉತ್ತರಿಸಿದರು: "ಅಲ್ಲಾಹನಾಣೆ! ಹೌದು." ಅವರು ಕೇಳಿದರು: "ಅಲ್ಲಾಹನನ್ನು ಮುಂದಿಟ್ಟು ಕೇಳುತ್ತೇನೆ. ನಮ್ಮಲ್ಲಿನ ಶ್ರೀಮಂತರಿಂದ ಈ ದಾನವನ್ನು ಪಡೆದು ನಮ್ಮಲ್ಲಿರುವ ಬಡವರಿಗೆ ಹಂಚಬೇಕೆಂದು ತಮಗೆ ಆದೇಶಿಸಿದ್ದು ಅಲ್ಲಾಹನೋ?” ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: "ಅಲ್ಲಾಹನಾಣೆ! ಹೌದು." ಆಗ ಆ ವ್ಯಕ್ತಿ ಹೇಳಿದರು: "ತಾವು ತಂದ ಸಂದೇಶದಲ್ಲಿ ನಾನು ವಿಶ್ವಾಸವಿಟ್ಟಿದ್ದೇನೆ. ನಾನು ನನ್ನ ಗೋತ್ರದ ದೂತನಾಗಿ ಇಲ್ಲಿಗೆ ಬಂದಿದ್ದೇನೆ. @ನಾನು ಬನೂ ಸಅದ್ ಗೋತ್ರಕ್ಕೆ ಸೇರಿದ ದಿಮಾಮ್ ಬಿನ್ ಸಅಲಬ."